ಆರಂಭ್ ಸುದ್ದಿ ಕನ್ನಡ

ಅಲ್ಪಸಂಖ್ಯಾತ ಫಲಾನುಭವಿಗಳ ಪ್ರಮಾಣ ಹೆಚ್ಚಳಕ್ಕೆ ಸಿದ್ದರಾಮಯ್ಯ !!!!

ಬೆಂಗಳೂರು ಕೇಂದ್ರದ ಮಾರ್ಗಸೂಚಿಯಂತೆ ವಸತಿ ಮೀಸಲು.

ರಾಜ್ಯ ಸರ್ಕಾರದ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳ ಪ್ರಮಾಣ ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಸಚಿವ ಸಂಪುಟವು ನಿರ್ಣಯ ಕೈಗೊಂಡಿದೆ. ಇದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ (2019) ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನ ಎಂದು ಸಿಎಂ ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸ್ಥೆಗಳಲ್ಲಿ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತ ಸಮುದಾಯಗಳಿಗೆ ಶೇ.15 ಭೌತಿಕ ಹಾಗೂ ಆರ್ಥಿಕ ಗುರಿ ಸಾಧಿಸಬೇಕೆಂದು ಈ ಕಾರ್ಯಕ್ರಮ ಸ್ಪಷ್ಟವಾಗಿ ನಿರ್ದೇಶಿಸುತ್ತದೆ ಎಂದು ಹೇಳಿರುವ ಸಿಎಂ, ಇದು ಕೇಂದ್ರ ಸರ್ಕಾರದಿಂದಲೇ ನೀಡಲಾದ ಮಾರ್ಗಸೂಚಿಗಳಾಗಿವೆ ಎಂದು ಹೇಳಿದ್ದಾರೆ. ಇದೊಂದು ಅಸಂವಿಧಾನಿಕ ಅಥವಾ ತುಸ್ವೀಕರಣ ನೀತಿಯಾಗಿದ್ದರೆ, ಈ ನಿಯಮವನ್ನು ಪಾಲನೆ ಮಾಡುವಂತೆ ಕೇಂದ್ರ ಸರ್ಕಾರ ಏಕೆ ಎಲ್ಲ ರಾಜ್ಯಗಳಿಗೆ ತಿಳಿಸಿದೆ? ಪ್ರಧಾನ ಮಂತ್ರಿ ಆವಾಸ್

ಯೋಜನೆಯಂತಹ ಕಾರ್ಯಕ್ರಮದಲ್ಲಿ ಏಕೆ ಇದನ್ನು ಅನುಷ್ಠಾನ ಮಾಡಲಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ನಿರ್ಣಯವು ವಸತಿ ಹಂಚಿಕೆಯಲ್ಲಿ ಹೆಚ್ಚುವರಿ ಮೀಸಲಾತಿಯನ್ನು ರಾಜ್ಯಕ್ಕೆ ಅನ್ವಯಿಸುವಂತಹದ್ದಲ್ಲ. ಕೇವಲ ನಿರ್ದಿಷ್ಟ ಸವಾಲುಗಳಿಗೆ ಮಾತ್ರ ಸೀಮಿತವಾಗಿದೆ. ಅಲ್ಪಸಂಖ್ಯಾತ ಜನಸಂಖ್ಯೆಯು ಶೇ.10ಕ್ಕಿಂತ ಕಡಿಮೆಯಿರುವ ಹಲವು ಪಂಚಾಯಿತಿಗಳಲ್ಲಿ ನಿಗದಿಪಡಿಸಲಾದ ಶೇ.10 ಮೀಸಲಾತಿಯ ಅವಕಾಶವು ಸದ್ಬಳಕೆಯಾಗುತ್ತಿರಲಿಲ್ಲ. ಹೀಗಾಗಿ ನಿಗದಿಪಡಿಸಲಾದ ಗುರಿ ತಲುಪಲು ಮತ್ತು ಲೋಪದೋಷಗಳನ್ನು ತಡೆಯಲು ಪಂಚಾಯಿತಿಗಳಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಿರುವ ಕಡೆಗೆ ಗರಿಷ್ಠ ಶೇ.15 ಮಿತಿಗೆ ಒಳಪಟ್ಟು ಮರುಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ. ನಮ್ಮ ಈ ನಿರ್ಧಾರದಿಂದ ಪ್ರಸಕ್ತ ವರ್ಷ ಸುಮಾರು 34,000 ಅಲ್ಪಸಂಖ್ಯಾತ ಕುಟುಂಬಗಳಿಗೆ ಲಾಭವಾಗಲಿದೆ. ಇದು ಕೇವಲ ಆಡಳಿತಾತ್ಮಕ ದೃಷ್ಟಿಯಿಂದ ಸಾಮಾನ್ಯ ವರ್ಗದಲ್ಲಿ ಮಾಡಿಕೊಂಡ ಹೊಂದಾಣಿಕೆಯಾಗಿದ್ದು, ಇದರಿಂದ ಎಸ್‌ಸಿ, ಎಸ್‌ಟಿ ಅಥವಾ ಒಬಿಸಿ ವರ್ಗಗಳಿಗೆ ತೊಂದರೆಯಾಗುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.

ಬಿಜೆಪಿಯವರ ಟೀಕೆಗಳು ದುರುದ್ದೇಶ ಹಾಗೂ ರಾಜಕೀಯ ಪ್ರೇರಿತ. ರಾಷ್ಟ್ರಮಟ್ಟದಲ್ಲಿ ಶೇ.15 ಮೀಸಲಾತಿ ಜಾರಿಗೊಳಿಸಿರುವ ಅದೇ ಪಕ್ಷವು ಕರ್ನಾಟಕದಲ್ಲಿ ತೆಗೆದುಕೊಂಡಿರುವ ನಿರ್ಣಯವನ್ನು ಟೀಕಿಸುತ್ತಿದೆ.

ಬಿಜೆಪಿ ನಾಯಕರಿಗೆ ವಿರೋಧವಿದ್ದರೆ ಅವರದೇ ಕೇಂದ್ರ ಸರ್ಕಾರವು ಈ ಮಾರ್ಗಸೂಚಿಗಳನ್ನು ಏಕೆ ಮುಂದುವರಿಸಿಕೊಂಡು ಹೋಗುತ್ತಿದೆ ಎಂಬುದನ್ನು ವಿವರಿಸಲಿ. ಬೇರೆ ರಾಜ್ಯಗಳೂ ಪಾಲಿಸಬೇಕು ಎಂದೇಕೆ ಕೇಂದ್ರವು ಬಯಸುತ್ತಿದೆ ಎಂಬುದನ್ನು ವಿವರಿಸಲಿ.

ಈ ರೀತಿಯ ವ್ಯವಸ್ಥಿತ ಅಪಪ್ರಚಾರದ ಹಿಂದೆ ಕೋಮು ವಿವಾದ ಸೃಷ್ಟಿಸುವ ಹುನ್ನಾರವಲ್ಲದೆ ಬೇರೇನೂ ಇಲ್ಲ. ಇದು ರಾಜ್ಯದ ಬಡವರು ಮತ್ತು ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತುವ ಪ್ರಯತ್ನದ ದಿಕ್ಕು ತಪ್ಪಿಸುವ ಕುತಂತ್ರವಾಗಿದೆ.

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments